ಮುಖ್ಯಮಂತ್ರಿ ಆಗಲಿಲ್ಲ ಎಂದು ನಿರಾಶರಾಗಬೇಡಿ: ಡಿಕೆಶಿ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರದ ಚುಕ್ಕಾಣಿಯನ್ನು ಕೊಡಿಸಲು ಸಫಲವಾಗಿದ್ದ ಡಿ.ಕೆ.ಶಿವಕುಮಾರ್ ಶತಾಯಗತಾಯ ಮುಖ್ಯಮಂತ್ರಿ ಆಗಬೇಕೆಂದು ಹಠ ಹಿಡಿದು ಕೊನೆಗೆ ಉಪಮುಖ್ಯಮಂತ್ರಿ ಸ್ಥಾನವನ್ನುಒಪ್ಪಿಕೊಂಡಿದ್ದರು, ಈಗ ಮತ್ತೆ ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಕನಕಪುರ ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದ್ದ ಮತದಾರರಿಗೆ ಧನ್ಯವಾದ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ‘ನನ್ನನ್ನು ಮುಖ್ಯಮಂತ್ರಿಯನ್ನಾಗಿಸಬೇಕು ಎಂದು ಅತ್ಯಧಿಕ ಮತಗಳೊಂದಿಗೆ ಗೆಲ್ಲಿಸಿದ್ದೀರಿ. ಹೈಕಮಾಂಡ್ ಡಿಸಿಎಂ ಜವಾಬ್ದಾರಿ ನೀಡಿದೆ. ಆದರೆ ನಿರಾಶರಾಗುವುದು ಬೇಡ. ಮುಂದೆ ಒಳ್ಳೆಯ ದಿನಗಳು ಬರಲಿವೆ ಪಕ್ಷದ ಹಿರಿಯರ ಮಾತು ಕೇಳಿ ಉಪಮುಖ್ಯಮಂತ್ರಿ ಸ್ಥಾನ ಒಪ್ಪಿಕೊಂಡೆ. ನಿಮ್ಮ ನಿರೀಕ್ಷೆ ಹುಸಿಯಾಗುವುದಿಲ್ಲ ಎಂದಿದ್ದಾರೆ.

ದೇಶ ಹಾಗೂ ರಾಜ್ಯದ ಇತಿಹಾಸದಲ್ಲಿ ಒಂದೇ ದಿನ ಐದು ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ತೀರ್ಮಾನ ನಿನ್ನೆ ಕೈಗೊಳ್ಳಲಾಗಿದೆ. ಇದರಿಂದ ಬಿಜೆಪಿ ಹಾಗೂ ಜೆಡಿಎಸ್ ನವರ ದುಃಖ, ದುಗುಡ ಹೆಚ್ಚಾಗಿದ್ದು, ರಾಜ್ಯದ ಜನ ನೋಡುತ್ತಿದ್ದಾರೆ. ನೀವೆಲ್ಲರೂ ನಿಮ್ಮ ಕ್ಷೇತ್ರದಲ್ಲಿ ಫಲಾನುಭವಿಗಳಿಗೆ ಈ ಯೋಜನೆ ಲಾಭ ಸಿಗುವಂತೆ ಮಾಡಬೇಕು’ ಎಂದು ಹೇಳಿದ್ದಾರೆ.

 

Verified by MonsterInsights